ನವದೆಹಲಿ: ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ಕಾನೂನುಗಳನ್ನು ಮತ್ತಷ್ಟು ಕಠಿಣಗೊಳಿಸುವ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ–2026 ಅನ್ನು ಲೋಕಸಭೆ ಬುಧವಾರ ಧ್ವನಿಮತದ ಮೂಲಕ ಅಂಗೀಕರಿಸಿದೆ.
ಮಸೂದೆಯ ಮೇಲಿನ ಚರ್ಚೆಗೆ ಉತ್ತರಿಸಿದ ಕೇಂದ್ರ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಜಿತೇಂದ್ರ ಸಿಂಗ್, ತಿದ್ದುಪಡಿಗಳ ಉದ್ದೇಶ ಸಾರ್ವಜನಿಕ ಪರೀಕ್ಷೆಗಳ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ನ್ಯಾಯಸಮ್ಮತತೆಯನ್ನು ಬಲಪಡಿಸುವುದಾಗಿದೆ ಎಂದು ಹೇಳಿದರು.
ತಿದ್ದುಪಡಿ ಪ್ರಕಾರ, ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗುವವರಿಗೆ ವಿಧಿಸುವ ಶಿಕ್ಷೆಯನ್ನು ಮೂರು ವರ್ಷಗಳಿಂದ 10 ವರ್ಷಗಳವರೆಗೆ ಹೆಚ್ಚಿಸಲಾಗಿದೆ. ಗರಿಷ್ಠ ದಂಡವನ್ನು ₹10 ಲಕ್ಷದಿಂದ ₹50 ಲಕ್ಷಕ್ಕೆ ಏರಿಸಲಾಗಿದೆ. ಅಕ್ರಮದಲ್ಲಿ ಭಾಗಿಯಾಗಿರುವ ಸೇವಾ ಪೂರೈಕೆ ಸಂಸ್ಥೆಗಳಿಗೆ ₹5 ಕೋಟಿವರೆಗೆ ದಂಡ ವಿಧಿಸುವುದರ ಜೊತೆಗೆ, ಸಾರ್ವಜನಿಕ ಪರೀಕ್ಷೆಗಳನ್ನು ನಡೆಸುವ ನಿಷೇಧವನ್ನು ನಾಲ್ಕು ವರ್ಷದಿಂದ ಎಂಟು ವರ್ಷಗಳಿಗೆ ವಿಸ್ತರಿಸಲಾಗಿದೆ.

ಸಂಘಟಿತ ಪರೀಕ್ಷಾ ಅಕ್ರಮ ಪ್ರಕರಣಗಳಲ್ಲಿ ಸೇವಾ ಪೂರೈಕೆದಾರರ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಐದುರಿಂದ 10 ವರ್ಷಗಳ ಜೈಲು ಶಿಕ್ಷೆ ಮತ್ತು ₹5 ಕೋಟಿವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಗಂಭೀರ ಸಂಘಟಿತ ಅಪರಾಧ ಪ್ರಕರಣಗಳಲ್ಲಿ ಗರಿಷ್ಠ ದಂಡವನ್ನು ₹10 ಕೋಟಿಗೆ ಹೆಚ್ಚಿಸಲಾಗಿದೆ.
ಪ್ರಕರಣಗಳ ಶೀಘ್ರ ವಿಲೇವಾರಿಗೆ ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆಗೂ ಮಸೂದೆ ಅವಕಾಶ ನೀಡಿದ್ದು, ಎರಡು ತಿಂಗಳೊಳಗೆ ತನಿಖೆ ಹಾಗೂ ಆರೋಪಪಟ್ಟಿ ಸಲ್ಲಿಸಿದ ಮೂರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವ ಗುರಿ ನಿಗದಿಪಡಿಸಲಾಗಿದೆ. ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ ಮತ್ತು ವಿಶೇಷ ತನಿಖಾ ತಂಡ ರಚಿಸಲು ಸರ್ಕಾರಕ್ಕೆ ಅಧಿಕಾರ ನೀಡಲಾಗಿದೆ.
ಯುಪಿಎಸ್ಸಿ, ಎಸ್ಎಸ್ಸಿ, ರೈಲ್ವೆ ನೇಮಕಾತಿ ಮಂಡಳಿ, ಐಬಿಪಿಎಸ್ ಮತ್ತು ಎನ್ಟಿಎ ಸೇರಿದಂತೆ ವಿವಿಧ ಸಂಸ್ಥೆಗಳು ನಡೆಸುವ ಸಾರ್ವಜನಿಕ ಪರೀಕ್ಷೆಗಳು ಈಗಾಗಲೇ 2024ರ ಕಾಯ್ದೆಯ ವ್ಯಾಪ್ತಿಯಲ್ಲಿವೆ. ಈ ಕಾಯ್ದೆಯಡಿ ಇದುವರೆಗೆ 52 ಎಫ್ಐಆರ್ಗಳು ದಾಖಲಾಗಿದ್ದು, ಪರೀಕ್ಷಾ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ಸರ್ಕಾರ ಬದ್ಧವಾಗಿದೆ ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
